Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

29 June 2012

ದಿ|ಖಂಡಿಗೆ ಶಾಮ ಭಟ್ಟರ ತೈಲ ಚಿತ್ರ ಅನಾವರಣ

    “ದುಡ್ಡು ಬಟ್ಟೆಯಿಂದ ದೊಡ್ಡವರಾದವರಿಲ್ಲ, ದೊಡ್ಡ ಮನಸ್ಸಿನಿಂದ ದೊಡ್ಡವರಾದವರೇ ಎಲ್ಲ. ಲೋಕಕ್ಕೆ ಆದರ್ಶರೆನಿಸಿಕೊಂಡವರೆಲ್ಲ ಈ ತತ್ವವನ್ನು ಅನುಸರಿಸಿಕೊಂಡವರು. ‘ಮಹಾಜನ’ ಎಂಬ ಪದಕ್ಕೆ ಅನ್ವರ್ಥವಾಗಿ ಬೆಳೆದ ಖಂಡಿಗೆ ಶಾಮ ಭಟ್ಟರ ರೂಪವನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳಲು ಈ ತೈಲ ವರ್ಣ ಚಿತ್ರ ಸಹಕಾರಿ. ಆ ಚಿತ್ರವೇ ಮುಂದಿನ ಪೀಳಿಗೆಗೆ ದಾರಿ ದೀಪವಾಗಬಲ್ಲದು" ಎಂದು ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್ ಅಭಿಪ್ರಾಯಪಟ್ಟರು. ಅವರು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಜರಗಿದ ಮಹಾಜನ ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ದಿ| ಖಂಡಿಗೆ ಶಾಮ ಭಟ್ಟರ ತೈಲ ವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

    ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಅಧ್ಯಕ್ಷತೆ ವಹಿಸಿದ್ದರು. ಪೂರ್ವ ವಿದ್ಯಾರ್ಥಿಗಳಾದ ಬಳ್ಳಪದವು ಶಂಕರನಾರಾಯಣ ಭಟ್, ಕುಂಜಾರು ಸುಬ್ರಾಯ ಭಟ್, ಚಿತ್ರ ಕಲಾವಿದ ರವಿ ಪಿಲಿಕ್ಕೋಡ್, ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ, ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಶುಭಾಶಯಗಳನ್ನು ಅರ್ಪಿಸಿದರು.


    ಚಿತ್ರ ಕಲಾವಿದ ರವಿ ಪಿಲಿಕ್ಕೋಡ್ ಅವರನ್ನು ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ ಶಾಲು ಹೊದೆಸಿ ಫಲ ಸಮರ್ಪಣೆ ಮಾಡುವುದರ ಮೂಲಕ ಗೌರವಿಸಿದರು. ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಸ್ವಾಗತಿಸಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ ಕೋರಿಕ್ಕಾರು ಕಾರ್ಯಕ್ರಮ ನಿರೂಪಿಸಿದರು.

No comments:

Post a Comment