“ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವಂತೆ ಕೇರಳದಲ್ಲಿ ವ್ಯವಸ್ಥಿತವಾಗಿ ಪ್ರತಿವರ್ಷವೂ ಆಯೋಜಿಸಲ್ಪಡುತ್ತಿರುವ ಕ್ರೀಡಾಕೂಟಗಳು ಅತ್ಯಂತ ಪರಿಣಾಮಕಾರಿಯಾಗಿವೆ. ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಪೂರಕವಾಗುವ ಈ ಕ್ರೀಡಾಕೂಟವು ಕುಂಬಳೆ ಉಪಜಿಲ್ಲಾ ಮಟ್ಟದಲ್ಲಿ ನಮ್ಮ ಗ್ರಾಮೀಣ ಪ್ರದೇಶವಾದ ನೀರ್ಚಾಲಿನಲ್ಲಿ ನಡೆಯಲಿರುವುದು ಸಂತಸದ ವಿಚಾರ. ಎಂದು ಬದಿಯಡ್ಕ ಗ್ರಾಮ ಪಂಚಾಯತು ಉಪಾಧ್ಯಕ್ಷ ಕೆ.ಎನ್.ಕೃಷ್ಣ ಭಟ್ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಯಲ್ಲಿ ಕುಂಬಳೆ ಉಪಜಿಲ್ಲಾ ಕ್ರೀಡಾಕೂಟದ ಲಾಂಛನವನ್ನು ಲೋಕಾರ್ಪಣೆಗೈದು ಮಾತನಾಡುತ್ತಿದ್ದರು.
ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ನಿಡುಗಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ವ್ಯವಸ್ಥಾಪಕ ಜಯದೇವ ಖಂಡಿಗೆ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಪ್ಪಣ್ಣ ಸೀತಂಗೋಳಿ, ಅಬ್ದುಲ್ಲ ತಲ್ಪಣಾಜೆ ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯ ಸಿ.ಎಚ್.ವೆಂಕಟರಾಜ ಉಪಸ್ಥಿತರಿದ್ದರು. ಕುಂಬಳೆ ಉಪಜಿಲ್ಲಾ ಶಿಕ್ಷಣಾಧಿಕಾರಿ ಕೈಲಾಸಮೂರ್ತಿ ಸ್ವಾಗತಿಸಿದರು. ಕುಂಬಳೆ ಉಪಜಿಲ್ಲಾ ಸ್ಪೋರ್ಟ್ಸ್ ಮತ್ತು ಗೇಮ್ಸ್ ಅಸೋಸಿಯೇಷನ್ ಕಾರ್ಯದರ್ಶಿ ಎಂ. ಸೂರ್ಯನಾರಾಯಣ ವಂದಿಸಿದರು.