Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

30 August 2012

ಓಣಂ ಆಚರಣೆ



ಮೊನ್ನೆ 24 ರಂದು, ಓಣಂ ರಜೆ ಆರಂಭವಾಗುವ ಮುನ್ನ ನಮ್ಮ ಶಾಲೆಯಲ್ಲಿ ಓಣಂ ಆಚರಣೆ ಜರಗಿತು. ಗಣಿತ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಹೂರಂಗವಲ್ಲಿಯಲ್ಲಿ ಗಣಿತ ಆಕೃತಿಗಳನ್ನು ಬಿಡಿಸುವ ಸ್ಪರ್ಧೆ, ಮೊಸರು ಕುಡಿಕೆ ಇತ್ಯಾದಿ ಸ್ಪರ್ಧೆಗಳು ಜರಗಿದವು.  ರಕ್ಷಕ ಶಿಕ್ಷಕ ಸಂಘದ ಸದಸ್ಯರು ವಿದ್ಯಾರ್ಥಿಗಳಿಗೆ ‘ಓಣಂ ಊಟ’ವನ್ನು ಬಡಿಸಿದರು.

18 August 2012

ಕಾಗದದ ದೋಣಿ

ಅಧ್ಯಾಪಕರ ಸಾನ್ನಿಧ್ಯದಲ್ಲಿ ನೀರಲ್ಲಿ ಇಳಿದು ಆಟವಾಡುವುದೆಂದರೆ ಮಕ್ಕಳಿಗೆ ತುಂಬಾ ಖುಷಿ. ಪುತ್ತಿಗೆ ಗ್ರಾಮ ಪಂಚಾಯತು ವ್ಯಾಪ್ತಿಯ ಎಡನಾಡು ಗ್ರಾಮದಲ್ಲಿರುವ ಆನಾಡಿಪಳ್ಳ ಮದಕ ಹೆಚ್ಚು ಆಳವಿಲ್ಲದ ನೀರಾಶ್ರಯ, ವರ್ಷಪೂರ್ತಿ ನೀರಿರುವ ಪ್ರದೇಶ. ಅಂತಹ ನೀರ ಜಾಗದಲ್ಲಿ ಕಾಗದದ ದೋಣಿ ಬಿಟ್ಟು ಸಂತಸ ಪಟ್ಟ ವಿದ್ಯಾರ್ಥಿಗಳು...

ಮುಖಾರಿಕಂಡ ಅಣೆಕಟ್ಟಿನ ಕಡೆಗೆ...



ಕಾಲು ವಾರ್ಷಿಕ ಪರೀಕ್ಷೆಗಳ ನಡುವೆ ನಿನ್ನೆ, ನಮ್ಮ ಶಾಲಾ ಯು.ಪಿ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದ ದಿನ. ‘ಸೋಣೆ’ ತಿಂಗಳ ‘ಸೋನೆ’ ಮಳೆಯ ನಡುವೆ ಸೀತಾಂಗೋಳಿ ಪರಿಸರದಲ್ಲಿ ಒಂದು ಸುತ್ತಾಟ. ಮುಖಾರಿಕಂಡ ಅಣೆಕಟ್ಟು ಸಂದರ್ಶಿಸಿ, ಕೋಡಿಮೂಲೆಯಲ್ಲಿ ಕಬ್ಬಿಣದ ಕತ್ತಿ ತಯಾರಿಯ ಬಗ್ಗೆ ಮಾಹಿತಿ ತಿಳಿದುಕೊಂಡು ಮರಳಿ ಶಾಲೆ ಸೇರುವಾಗ ಒಂದು ಖುಷಿ...

15 August 2012

ಸ್ವಾತಂತ್ರ್ಯ ಯಾತ್ರೆ

“ಸ್ವಾತಂತ್ರ್ಯ ದಿನದ ಆಚರಣೆ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮವನ್ನು ಬೆಳಗಿಸುತ್ತದೆ. ಆ ಮೂಲಕ ಹಿರಿಯರ  ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನೆನಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾತಂತ್ರ್ಯದ ಸಂದೇಶವನ್ನು ಉಳಿಸಿ ದೇಶದ ಹಿತಕ್ಕಾಗಿ ನಾವು ಶ್ರಮಿಸಬೇಕಾಗಿದೆ" ಎಂದು ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ನಿಡುಗಳ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಗಳಲ್ಲಿ ಜರಗಿದ ಸ್ವಾತಂತ್ರ್ಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಹಿರಿಯ ಶಿಕ್ಷಕರಾದ ಎಸ್.ವಿ.ಭಟ್, ಕೆ.ನಾರಾಯಣ ಭಟ್ ಮತ್ತು ಎಂ.ಸೂರ್ಯನಾರಾಯಣ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು.

ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಯಿತು.

13 August 2012

‘ಹೂ’ಗಳನ್ನು ಉಪಯೋಗಿಸಿ ಭೂಪಟ

ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ನಮ್ಮ ಶಾಲಾ ಸಮಾಜ ವಿಜ್ಞಾನ ಕ್ಲಬ್ ಆಶ್ರಯದಲ್ಲಿ 10.08.2012 ಶುಕ್ರವಾರ ನಡೆದ ಹೂರಂಗವಲ್ಲಿಯಲ್ಲಿ ಭಾರತ ಭೂಪಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡ ಮತ್ತು ಕೇರಳ ಭೂಪಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿಯರ ತಂಡ.

ತರಕಾರಿ ಬೀಜ ವಿತರಣೆ

ನಮ್ಮ ಶಾಲೆಯಲ್ಲಿ 10.08.2012 ಶುಕ್ರವಾರ ಕೇರಳ ಸರಕಾರದ ಕೃಷಿ ಇಲಾಖೆಯು ವಿತರಿಸಿದ ತರಕಾರಿ ಬೀಜಗಳನ್ನು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಿದ್ಯಾರ್ಥಿಗಳಿಗೆ ವಿತರಿಸಿದರು.

10 August 2012

ಸಿ.ಪಿ.ಸಿ.ಆರ್.ಐ ಗೆ ಭೇಟಿ

ಕಾಸರಗೋಡಿನಲ್ಲಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರಕ್ಕೆ 06.08.2012 ಸೋಮವಾರದಂದು ನಮ್ಮ ಶಾಲಾ ವಿದ್ಯಾರ್ಥಿಗಳು ಭೇಟಿ ನೀಡಿ ವಿಜ್ಞಾನಿ ಮಣಿಕಂಠನ್ ಅವರಿಂದ ಕಸಿ ಕಟ್ಟುವ ವಿಧಾನದ ಬಗ್ಗೆ ಮಾಹಿತಿ ಪಡೆದುಕೊಂಡರು.

“ಶ್ರೀಕೃಷ್ಣ ಆತ್ಮೀಯ ದೇವರು": ಕೆ.ಶಿವಕುಮಾರ್


 “ಶ್ರೀಕೃಷ್ಣನ ಬಾಲಲೀಲೆಗಳು ಎಂದೆಂದಿಗೂ ಚೇತೋಹಾರಿ. ಧರ್ಮ ಸಂಸ್ಥಾಪನೆಗಾಗಿ ಅವನು ಕೈಗೊಂಡ ಕಾರ್ಯಗಳ ಸಮಾಜಕ್ಕೆ ಆದರ್ಶ. ಅವನ ಪಥ ಅನುಕರಣೀಯ, ಆದರಿಂದಲೇ ಆತ ಎಲ್ಲರಿಗೂ ಆತ್ಮೀಯ ದೇವರು ಎಂದು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು ೦೯.೦೮.೨೦೧೨ ಗುರುವಾರ ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ್ ರಾವ್ ಮುಖ್ಯ ಅತಿಥಿಗಳಾಗಿದ್ದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ. ಗೋವಿಂದ ಭಟ್ ಉಪಸ್ಥಿತರಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಸುಶೀಲಾ.ಎಸ್ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಹಳೆ ವಿದ್ಯಾರ್ಥಿಗಳಾದ ಹೇಮಶ್ರೀ ಕಾಕುಂಜೆ ಮತ್ತು ಶ್ರೀವಾಣಿ ಕಾಕುಂಜೆ ಇವರಿಂದ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ಜರಗಿತು. ವಯಲಿನ್‌ನಲ್ಲಿ ಪ್ರಭಾಕರ ಕುಂಜಾರು ಮತ್ತು ಮೃದಂಗದಲ್ಲಿ ಶ್ರೀಧರ ಭಟ್ ಬಡಕ್ಕೇಕೆರೆ ಸಹಕರಿಸಿದರು.

11 July 2012

ಶ್ರದ್ಧಾ. ಎಸ್ ಬಿಡಿಸಿದ ಚಿತ್ರ

ಇದು ಒಂಭತ್ತನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿರುವ ಹುಡುಗಿ ಶ್ರದ್ಧಾ.ಎಸ್ ಬಿಡಿಸಿದ ಚಿತ್ರ.

29 June 2012

ದಿ|ಖಂಡಿಗೆ ಶಾಮ ಭಟ್ಟರ ತೈಲ ಚಿತ್ರ ಅನಾವರಣ

    “ದುಡ್ಡು ಬಟ್ಟೆಯಿಂದ ದೊಡ್ಡವರಾದವರಿಲ್ಲ, ದೊಡ್ಡ ಮನಸ್ಸಿನಿಂದ ದೊಡ್ಡವರಾದವರೇ ಎಲ್ಲ. ಲೋಕಕ್ಕೆ ಆದರ್ಶರೆನಿಸಿಕೊಂಡವರೆಲ್ಲ ಈ ತತ್ವವನ್ನು ಅನುಸರಿಸಿಕೊಂಡವರು. ‘ಮಹಾಜನ’ ಎಂಬ ಪದಕ್ಕೆ ಅನ್ವರ್ಥವಾಗಿ ಬೆಳೆದ ಖಂಡಿಗೆ ಶಾಮ ಭಟ್ಟರ ರೂಪವನ್ನು ಚಿರಸ್ಥಾಯಿಯಾಗಿ ಉಳಿಸಿಕೊಳ್ಳಲು ಈ ತೈಲ ವರ್ಣ ಚಿತ್ರ ಸಹಕಾರಿ. ಆ ಚಿತ್ರವೇ ಮುಂದಿನ ಪೀಳಿಗೆಗೆ ದಾರಿ ದೀಪವಾಗಬಲ್ಲದು" ಎಂದು ನಿವೃತ್ತ ಪ್ರೊಫೆಸರ್ ಕಾನತ್ತಿಲ ಮಹಾಲಿಂಗ ಭಟ್ ಅಭಿಪ್ರಾಯಪಟ್ಟರು. ಅವರು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಜರಗಿದ ಮಹಾಜನ ಸಂಸ್ಕೃತ ಕಾಲೇಜಿನ ಪ್ರಾಂಶುಪಾಲ ದಿ| ಖಂಡಿಗೆ ಶಾಮ ಭಟ್ಟರ ತೈಲ ವರ್ಣ ಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

    ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಬಿ.ಎಂ.ಸುಬ್ರಾಯ ಭಟ್ ಬೊಳುಂಬು ಅಧ್ಯಕ್ಷತೆ ವಹಿಸಿದ್ದರು. ಪೂರ್ವ ವಿದ್ಯಾರ್ಥಿಗಳಾದ ಬಳ್ಳಪದವು ಶಂಕರನಾರಾಯಣ ಭಟ್, ಕುಂಜಾರು ಸುಬ್ರಾಯ ಭಟ್, ಚಿತ್ರ ಕಲಾವಿದ ರವಿ ಪಿಲಿಕ್ಕೋಡ್, ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ, ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಸೀತಾರಾಮ ಆಚಾರ್ಯ ಶುಭಾಶಯಗಳನ್ನು ಅರ್ಪಿಸಿದರು.


    ಚಿತ್ರ ಕಲಾವಿದ ರವಿ ಪಿಲಿಕ್ಕೋಡ್ ಅವರನ್ನು ಡಾ|ಸುಬ್ರಹ್ಮಣ್ಯ ಭಟ್ ಖಂಡಿಗೆ ಶಾಲು ಹೊದೆಸಿ ಫಲ ಸಮರ್ಪಣೆ ಮಾಡುವುದರ ಮೂಲಕ ಗೌರವಿಸಿದರು. ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಸ್ವಾಗತಿಸಿ, ಮಹಾಜನ ಸಂಸ್ಕೃತ ಕಾಲೇಜು ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕರಾದ ಚಂದ್ರಶೇಖರ ರೈ ಮತ್ತು ಗೋವಿಂದ ಶರ್ಮ ಕೋರಿಕ್ಕಾರು ಕಾರ್ಯಕ್ರಮ ನಿರೂಪಿಸಿದರು.

ಮಾದಕ ದ್ರವ್ಯ ವಿರುದ್ಧ ಭಿತ್ತಿ ಚಿತ್ರಗಳು

ಮೊನ್ನೆ ಮಾದಕ ದ್ರವ್ಯ ವಿರುದ್ಧ ದಿನದ ಅಂಗವಾಗಿ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಮ್ಮ ಶಾಲಾ ‘ಆರ್ಟ್ಸ್ ಕ್ಲಬ್’ ಸದಸ್ಯರು ರಚಿಸಿದ ಪೋಸ್ಟರುಗಳು, ವಿದ್ಯಾರ್ಥಿಗಳನ್ನು ಆಕರ್ಷಿಸಿದವು.

26 June 2012

ಮಾದಕ ದ್ರವ್ಯ ವಿರುದ್ಧ ದಿನ

ಇಂದು 26.06.2012 ಮಂಗಳವಾರ ವಿಶ್ವ ಮಾದಕ ದ್ರವ್ಯ ವಿರುದ್ಧ ದಿನ. ಆ ಹಿನ್ನೆಲೆಯಲ್ಲಿ ಸಾಮಾಜಿಕ ಜಾಗೃತಿಯನ್ನು ಬೆಳೆಸುವ ದೃಷ್ಟಿಯಿಂದ ನಮ್ಮ ಶಾಲಾ ವಿದ್ಯಾರ್ಥಿಗಳು ನೀರ್ಚಾಲು ಪೇಟೆಯಲ್ಲಿ ಮೆರವಣಿಗೆ ನಡೆಸಿದರು.

ವಾಚನ ಸಪ್ತಾಹ

ಓದುವ ಅಭ್ಯಾಸವನ್ನು ಬೆಳಿಸಿಕೊಳ್ಳುವ ದೃಷ್ಟಿಯಿಂದ ನಮ್ಮ ಶಾಲಾ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ತಾಳೆಗರಿ ಸಹಿತ ವಿವಿಧ ಗ್ರಂಥಗಳ ಪ್ರದರ್ಶನ ಕಳೆದ ವಾರ ಜರಗಿತು.

11 June 2012

‘ಪ್ರಾಂಶುಪಾಲ’ರ ತೈಲ ವರ್ಣ ಚಿತ್ರ

ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾಗಿದ್ದು, ‘ಪ್ರಾಂಶುಪಾಲರೆಂದೇ ಖ್ಯಾತರಾಗಿದ್ದ ಶ್ರೀ ಖಂಡಿಗೆ ಶಾಮ ಭಟ್ಟರ ಚಿರಸ್ಮರಣೆಗಾಗಿ ಬೋವಿಕ್ಕಾನ ಪ್ರೌಢಶಾಲೆಯ ಖ್ಯಾತ ಚಿತ್ರ ಕಲಾವಿದ ಶ್ರೀ ರವಿ ಪಿಲಿಕ್ಕೋಡ್ ತಾವು ಚಿತ್ರಿಸುತ್ತಿರುವ ತೈಲವರ್ಣ ಚಿತ್ರಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಈ ಚಿತ್ರವನ್ನು ಶಾಲಾ ಶಿಕ್ಷಕ ವರ್ಗವು ಶಾಲೆಗೆ ಸಮರ್ಪಿಸಲಿದೆ.

05 June 2012

ವಿಶ್ವ ಪರಿಸರ ದಿನ

ಇಂದು ವಿಶ್ವ ಪರಿಸರ ದಿನ. ವಿದ್ಯಾರ್ಥಿಗಳಲ್ಲಿ ಪರಿಸರದ ಪ್ರಾಮುಖ್ಯತೆಯನ್ನು ನೆನಪಿಸಿಕೊಡುವ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಅರಣ್ಯ ಬೆಳೆಸುವ ‘ನನ್ನ ಮರ’ ಯೋಜನೆಗೆ ಪೂರಕವಾದ ಗಿಡಗಳನ್ನು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಮತ್ತು ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ವಿದ್ಯಾರ್ಥಿಗಳಿಗೆ ವಿತರಿಸಿದರು.

04 June 2012

ಶಾಲಾ ಪ್ರವೇಶೋತ್ಸವ 2012

ಬೇಸಿಗೆ ರಜಾ ಕಾಲ ಕಳೆದಿದೆ, ಮುಂಗಾರು ಕೇರಳಕ್ಕೆ ಕಾಲಿಡುವ ಹೊತ್ತಿನಲ್ಲೇ ಹೊಸ ಅಧ್ಯಯನ ವರ್ಷ ಆರಂಭವಾಗಿದೆ. ಹೊಸ ಹೊಸ ಕನಸನ್ನು ಕಟ್ಟಿಕೊಂಡು ಶಾಲೆಯ ಕಡೆಗೆ ಬಂದ ಚಿಣ್ಣರನ್ನು ಸ್ವಾಗತಿಸುವ ಕಾರ್ಯವೂ ಇಂದು ನಡೆದಿದೆ. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಾಲಿಂಗ ಪಾಟಾಳಿ ಮತ್ತು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಸಿಹಿತಿಂಡಿ ವಿತರಿಸಿ ಹೊಸ ವಿದ್ಯಾರ್ಥಿಗಳನ್ನು ಶಾಲೆಗೆ ಆದರದಿಂದ ಬರಮಾಡಿಕೊಂಡಿದ್ದಾರೆ. ಈಗ ವಿದ್ಯಾರ್ಥಿಗಳ ಕನಸುಗಳು ಗರಿಗೆದರುತ್ತಿವೆ...

02 May 2012

ಎಲ್ಲ ವಿಷಯಗಳಲ್ಲೂ ಎ+ ಪಡೆದವರು

ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಂಸ್ಕೃತ, ಕನ್ನಡ, ಇಂಗ್ಲಿಷ್, ಹಿಂದಿ, ಸಮಾಜ ವಿಜ್ಞಾನ, ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಗಣಿತ ಮತ್ತು ಮಾಹಿತಿ ವಿನಿಮಯ ತಂತ್ರಜ್ಞಾನ ಪರೀಕ್ಷೆಗಳಲ್ಲಿ ಎ+ ಗ್ರೇಡ್ ಪಡೆದ ವಿದ್ಯಾರ್ಥಿಗಳು ಇವರು, ಅವರ ಮುಂದಿನ ಹಾದಿಗೆ ಶುಭಾಶಯಗಳು...

27 April 2012

ಎಸ್ ಎಸ್ ಎಲ್ ಸಿ ಫಲಿತಾಂಶ ಬಂತು...

98% ಫಲಿತಾಂಶ ದಾಖಲಿಸಿದ್ದೇವೆ. ಈ ಬಾರಿಯ ಕೇರಳ ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯಲ್ಲಿ ಪರೀಕ್ಷೆ ಬರೆದ ೧೫೮ ಮಂದಿಯಲ್ಲಿ ೧೫೫ ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಲು ಸಂತೋಷಪಡುತ್ತಿದ್ದೇವೆ. ಕೇರಳ ರಾಜ್ಯ ಮಟ್ಟದ ಸರಾಸರಿ 93% ಆಗಿದ್ದು, ಅದಕ್ಕಿಂತ ಹೆಚ್ಚು ಫಲಿತಾಂಶ ನಮ್ಮ ಶಾಲೆಗೆ ಬಂದಿರುವುದು ಸಂತಸದ ಇನ್ನೊಂದು ವಿಷಯ. ಶಾಂತಿ.ಕೆ, ರಂಜನಾ.ಕೆ, ರಂಜಿತಾ.ಬಿ, ಗುರುವಿನಯ ಕೃಷ್ಣ ಕೆ.ಆರ್, ನಂದನ.ಎ, ಶಶಾಂಕ ಶರ್ಮ. ಎಸ್ ಈ ಆರು ಮಂದಿ ವಿದ್ಯಾರ್ಥಿಗಳು ಎಲ್ಲಾ ವಿಷಯಗಳಲ್ಲೂ ಎ+ ಗ್ರೇಡ್ ಪಡೆದು ಗೆಲುವಿನ ಕಿರೀಟಕ್ಕೆ ಗರಿಯನ್ನು ಸೇರಿಸಿದ್ದಾರೆ. ಶುಭಾಶಯಗಳು...

24 April 2012

ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಮುಂದಿನ ವಾರ


ಮೌಲ್ಯಮಾಪನ ಮೊನ್ನೆ ಇಪ್ಪತ್ತರಂದು ಕೊನೆಗೊಂಡಿದೆ. ಮುಂದಿನ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಬಿಸಿಲಿನ ಬೇಗೆಯ ನಡುವೆ, ಕಾಯುವಿಕೆ ವಿದ್ಯಾರ್ಥಿಗಳಿಗೂ, ನಮಗೂ ಅವರ್ಣನೀಯ ಅನುಭವಗಳನ್ನು ಕಟ್ಟಿಕೊಡುತ್ತಿದೆ. ಮುಂದಿನ ಕಲಿಯುವಿಕೆಯ ದಾರಿಯನ್ನು ಹುಡುಕುತ್ತಿರುವ ವಿದ್ಯಾರ್ಥಿಗಳಿಗೆ ನಮ್ಮ ಶುಭಾಶಯಗಳು...

30 March 2012

ನಾಳೆಯಿಂದ ರಜೆ...

ಬೇಸಗೆ ಪರೀಕ್ಷೆಗಳು ಇಂದು ಕೊನೆಗೊಳ್ಳುತ್ತವೆ. ಇನ್ನು ಅಧ್ಯಾಪಕ ಮಿತ್ರರಿಗೆ ‘ಉತ್ತರಕಾಂಡ’ ಆರಂಭವಾಗುತ್ತದೆ. ನಡುವೆಯೇ ಅಧ್ಯಾಪಕರಿಂದ ‘ಸೋಶಿಯೋ ಇಕೊನೊಮಿಕ್ ಸರ್ವೇ’ ಮತ್ತು ಜಾತಿವಾರು ಜನಗಣತಿ ಆರಂಭವಾಗಲಿದೆ. ಕಾಸರಗೋಡಿನ ಕನ್ನಡ ನೆಲದಲ್ಲಿ ಕನ್ನಡದ ಹೊಸ ಪೀಳಿಗೆಯನ್ನು ಹುಡುಕುತ್ತಾ ಮನೆ - ಮನೆ ಭೇಟಿ ಇದ್ದೇ ಇದೆ. ವಿದ್ಯಾರ್ಥಿಗಳಿಗೆ ಹೊಸ ಅನುವಗಳನ್ನು ಕಟ್ಟಿಕೊಡುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಅವಿರತವಾಗಿ ಮುಂದುವರಿಯುತ್ತಿದೆ. ಈ ಸಂದರ್ಭದಲ್ಲಿ ಅಂತಹ ಒಂದು ಪ್ರಯತ್ನವಾಗಿ ನಮ್ಮ ಶಾಲಾ ವಿದ್ಯಾರ್ಥಿಗಳು ದರ್ಜಿಯನ್ನು ಸಂದರ್ಶಿಸಿ ಮಾಹಿತಿಗಳನ್ನು ಪಡೆದುಕೊಂಡ ಸಂದರ್ಭದ ಫೋಟೋ ಒಂದನ್ನು ನಮ್ಮ ಕಡತದಿಂದ ಆರಿಸಿ ನಿಮ್ಮ ಮುಂದೆ ಇರಿಸುತ್ತಿದ್ದೇವೆ.
ವಸಂತ ಕಾಲ ನಮ್ಮ ಮುಂದೆ ಇದೆ...
ಎಲ್ಲ ಚಿಂತೆ - ಚಿಂತನೆಗಳ ನಡುವೆ ನಮ್ಮ ಶುಭಾಶಯಗಳನ್ನೂ ಸ್ವೀಕರಿಸಿ...