Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 12 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

24 October 2012

ಶಾರದಾ ಪೂಜಾ - 2012

ಇಂದು ನಮ್ಮ ಶಾಲೆಯ ಶಾರದಾ ಪೂಜೆ. ವರ್ಷಂಪ್ರತಿ ನಡೆಸುವಂತೆ ವಿದ್ಯಾರ್ಥಿಗಳು ‘ಅಷ್ಟಾವಧಾನ ಸೇವೆ’ ನೆರವೇರಿಸಿ, ಶಾರದಾಂಬೆಯ ಪೂಜೆಯಲ್ಲಿ ಪಾಲ್ಗೊಂಡರು. ನಿಮಗೆಲ್ಲರಿಗೂ ವಿಜಯ ದಶಮಿಯ ಶುಭಾಶಯಗಳು.

19 October 2012

ಕಾಸರಗೋಡಿನಲ್ಲಿ ಕನ್ನಡ ಉಳಿದಿದೆ: ಪ್ರಕಾಶ್ ಮತ್ತಿಹಳ್ಳಿ


“ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿಯೇ ಕನ್ನಡ ದೂರವಾಗುತ್ತಿದೆ. ಬೆಂಗಳೂರಿನ ಜನಸಂಖ್ಯೆಯ ಕೇವಲ ೨೩ ಶೇಕಡಾ ಜನ ಮಾತ್ರ ಸದ್ಯ ಕನ್ನಡಿಗರಿದ್ದಾರೆ. ಆದರೆ ಕರ್ನಾಟಕದಲ್ಲಿರುವ ಕನ್ನಡಿಗರಿಗಿಂತಲೂ ಸುಲಲಿತವಾಗಿ ಕನ್ನಡ ಮಾತನಾಡುವ ಜನ ಈ ಗಡಿನಾಡಿನಲ್ಲಿದ್ದಾರೆ ಎಂಬುದನ್ನು ತಿಳಿದು ಸಂತಸವಾಗಿದೆ. ಕನ್ನಡದ ಬೆಳವಣಿಗೆಗಾಗಿ ಈ ನಾಡಿನ ಜನತೆಯ ಜೊತೆ ನಾವೂ ಕೈಜೋಡಿಸುತ್ತೇವೆ. ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಪ್ರಾಯೋಜಿಸುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಕಾರ್ಯದರ್ಶಿ ಎಂ.ವಿ. ಮಹಾಲಿಂಗೇಶ್ವರ ಭಟ್, ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಸ್ವಾಗತಿಸಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಧನ್ಯವಾದ ಸಮರ್ಪಿಸಿದರು. ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಕಾರ್ಯಕ್ರಮ ನಿರೂಪಿಸಿದರು.

17 October 2012

19ರಂದು ಗ್ರಂಥಾಲಯ ಕಟ್ಟಡ - ಕಾಮಗಾರಿ ಪರಿಶೀಲನಾ ಸಭೆ

ನಮ್ಮ ಪ್ರೌಢಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೊಡಮಾಡುವ ಧನ ಸಹಾಯದಿಂದ ನಿರ್ಮಿಸಲಾದ ಗ್ರಂಥಾಲಯ ಕಟ್ಟಡದ ಕಾಮಗಾರಿ ಪರಿಶೀಲನಾ ಸಭೆಯು ೧೯.೧೦.೨೦೧೨ ಶುಕ್ರವಾರ ಮಧ್ಯಾಹ್ನ ೧೨ ಗಂಟೆಗೆ ಜರಗಲಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಎಚ್.ವಿ.ರಾಮಚಂದ್ರ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಶಾಲಾ ನಿವೃತ್ತ ಮುಖ್ಯೋಪಾಧ್ಯಾಯರಾದ ಬಿ.ಎಂ. ಸುಬ್ರಾಯ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಪ್ರಕಾಶ್ ಮತ್ತಿಹಳ್ಳಿಯವರು  ಪರಿಶೀಲನಾ ವರದಿಯನ್ನು ಮಂಡಿಸುವರು.  ಶಾಲಾ ಹಳೆ ವಿದ್ಯಾರ್ಥಿ ಕುಂಜಾರು ಸುಬ್ರಾಯ ಮತ್ತು ನಿವೃತ್ತ ಮುಖ್ಯೋಪಾಧ್ಯಾಯ ಪಡಿಯಡ್ಪು ಶಂಕರ ಭಟ್ ಶುಭ ಹಾರೈಸಲಿದ್ದಾರೆ.

12 October 2012

ರಕ್ತ ಗುಂಪು ನಿರ್ಣಯ ಶಿಬಿರ

ಇಂದು ನಮ್ಮ ಶಾಲೆಯಲ್ಲಿ ರಕ್ತ ಗುಂಪು ನಿರ್ಣಯ ಶಿಬಿರ ಜರಗಿತು. ನೀರ್ಚಾಲಿನಲ್ಲಿ ಹೊಸದಾಗಿ ಆರಂಭವಾದ ‘ಅಭಯ’ ಡಯಗ್ನೋಸ್ಟಿಕ್ ಲ್ಯಾಬ್‌ನ ತಜ್ಞೆ ಸುಲೋಚನಾ ಇಂದು ನಮ್ಮ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳ ರಕ್ತ ಗುಂಪು ನಿರ್ಣಯ ನಡೆಸಿಕೊಟ್ಟರು. ಕೃತಜ್ಞತೆಗಳು...

27 September 2012

ಶಾಲಾ ಮಟ್ಟದ ವೃತ್ತಿ ಪರಿಚಯ ಮೇಳ

ನಿನ್ನೆ ನಮ್ಮ ಶಾಲಾ ವಿದ್ಯಾರ್ಥಿಗಳಿಗೆ ಒಂದು ಹೊಸ ಅನುಭವ. ಪ್ರತೀ ವರ್ಷವೂ ಉಪಜಿಲ್ಲಾ ಮಟ್ಟದಲ್ಲಿ ನಡೆಯುವ ವೃತ್ತಿ ಪರಿಚಯ ಮೇಳಕ್ಕೆ ಪೂರ್ವಭಾವಿಯಾಗಿ ನಮ್ಮ ಶಾಲಾ ಮಟ್ಟದಲ್ಲಿ ಪ್ರಪ್ರಥಮ ಬಾರಿಗೆ ನಿನ್ನೆ ವೃತ್ತಿಪರಿಚಯ ಮೇಳವನ್ನು ಆಯೋಜಿಸಲಾಯಿತು. ಶಾಲಾ ಚಿತ್ರಕಲಾ ಶಿಕ್ಷಕ ಗೋವಿಂದ ಶರ್ಮ ಇವರ ಮುಂದಾಳ್ತನದಲ್ಲಿ ನಡೆದ ಸ್ಪರ್ಧಾ ಕಾರ್ಯಕ್ರಮದ ಒಂದು ನೋಟವನ್ನು ನಿಮ್ಮ ಮುಂದೆ ಇರಿಸುತ್ತಿದ್ದೇವೆ. ಸ್ಪರ್ಧೆಗಳು ವಿವಿಧ ವಿಭಾಗಳಲ್ಲಿ ನಡೆದಿದ್ದು ವಿಜೇತ ವಿದ್ಯಾರ್ಥಿಗಳು ಮುಂದಿನ ತಿಂಗಳು ಬದಿಯಡ್ಕದ ನವಜೀವನ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯುವ ಉಪಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಶುಭಾಶಯಗಳು...

22 September 2012

ಸಾಹಿತ್ಯ ಶಿಬಿರ 2012

ನಮ್ಮ ಶಾಲೆಯಲ್ಲಿ 21.09.2012 ಶುಕ್ರವಾರ ಜರಗಿದ ‘ಸಾಹಿತ್ಯ ಶಿಬಿರ’ದಲ್ಲಿ ಸಾಹಿತಿ ವಿ.ಬಿ.ಕುಳಮರ್ವ ಕಥಾ ರಚನೆ ಮತ್ತು ಸಾಹಿತಿ ಬಾಲ ಮಧುರಕಾನನ ಕವನ ರಚನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಾದ ಅರವಿಂದ ಎಸ್.ವಿ ಸ್ವಾಗತಿಸಿ ಸುಷ್ಮಾ.ಕೆ ವಂದಿಸಿದರು. ರಮ್ಯಶ್ರೀ. ಎ ಪ್ರಾರ್ಥಿಸಿದಳು. ಕ್ಷಮಾದೇವಿ.ಕೆ ಕಾರ್ಯಕ್ರಮ ನಿರೂಪಿಸಿದಳು.

ಚೈತನ್ಯ ಸಂರಕ್ಷಣೆ - ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮ

ಕನ್ನಡ, ಮಲಯಾಳ ಮತ್ತು ಆಂಗ್ಲ ಭಾಷಾ ವಿದ್ಯಾರ್ಥಿಗಳನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ಸ್ಪರ್ಧೆ ನಡೆಸುವ ಕ್ರಮ ತೀರಾ ಸರಿಯಲ್ಲ. ಯಾಕೆಂದರೆ ವಿವಿಧ ಭಾಷೆಗಳನ್ನು, ಶೈಲಿಯನ್ನು ಒಂದೇ ತಕ್ಕ್ಡಿಯಲ್ಲಿ ಇರಿಸಿ ತೂಗುವುದು ಸುಲಭವಲ್ಲ, ಹಾಗೂ ಅನೇಕ ಸಂದರ್ಭದಲ್ಲಿ ಬಹುಮಾನ ಮಲಯಾಳಿ ಪ್ರಾಬಲ್ಯಕ್ಕೆ ಒಳಗಾಗುತ್ತದೆ. ಈ ರೀತಿಯ ಪ್ರಸಂಗಗಳು ನಮ್ಮ ಕಾಸರಗೋಡಿನಲ್ಲಿ ಪದೇ ಪದೇ ಎದುರಾಗುತ್ತದೆ. ಆದರೆ ಮೊನ್ನೆ 20.09.2012 ಗುರುವಾರದಂದು ಬಹುಮಾನ ನಮ್ಮ ಕನ್ನಡದ ಪಾಲಿಗೆ ಒಲಿಯಿತು. ಕೇರಳ ಸರಕಾರದ ಕ್ರೀಡಾ ಮತ್ತು ಯುವಜನ ಖಾತೆಯು ‘ಚೈತನ್ಯ ಸಂರಕ್ಷಣೆ’ಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮುಳ್ಳೇರಿಯಾ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿನಿ ಕ್ಷಮಾದೇವಿ.ಕೆ ಕನ್ನಡದಲ್ಲಿ ಮಾತನಾಡಿ ಪ್ರಥಮ ಬಹುಮಾನ ‘ಸೈಕಲ್’ ಪಡೆದುಕೊಂಡಳು. ಬೇಳ ಕುಮಾರಮಂಗಲ ನಿವಾಸಿ ಬಾಲಕೃಷ್ಣಮೂರ್ತಿ ಮತ್ತು ಸತ್ಯಶೀಲಾ ಇವರ ಪುತ್ರಿಯಾದ ಈಕೆಗೆ ನಮ್ಮ ಶುಭ ಹಾರೈಕೆಗಳು.

14 September 2012

ಏಣಿಯರ್ಪು ಕಡೆಗೆ ಪ್ರಯಾಣ...


ಇಂದು ನಮ್ಮ ಪ್ರಯಾಣ ನೀರ್ಚಾಲಿನಿಂದ ಮೈಲೊಳಗಿನ ಅಂತರದಲ್ಲಿರುವ ಏಣಿಯರ್ಪು ಇಟ್ಟಿಗೆ ಕಾರ್ಖಾನೆ ಮತ್ತು ಬಿರ್ಮಿನಡ್ಕದಲ್ಲಿರುವ ಕೆಂಪು ಕಲ್ಲಿನ ಗಣಿಯ ಕಡೆಗೆ...  ಇಟ್ಟಿಗೆ ಕಾರ್ಖಾನೆಯಲ್ಲಿ ಮಡಿಕೆ ಮಾಡುವ ವಿಧಾನದ ಬಗ್ಗೆ ಬೇಳ ವಿಷ್ಣುಮೂರ್ತಿ ನಗರದ ದಾಮೋದರ ಪ್ರಾತ್ಯಕ್ಷಿಕೆ ನೀಡಿದರು. ನಂತರ ಕಲ್ಲಿನ ಗಣಿಯನ್ನು ಸಂದರ್ಶಿಸಿದ ವಿದ್ಯಾರ್ಥಿಗಳು ಕಲ್ಲಿನ ಗಣಿಗಳ ಗುಣ ಮತ್ತು ಅವುಗಳಿಂದಾಗುವ ತೊಂದರೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

06 September 2012

ಶಿಕ್ಷಕ ದಿನಾಚರಣೆ

ವಿದ್ಯಾರ್ಥಿಗಳ ಕಾಲುವಾರ್ಷಿಕ ಪರೀಕ್ಷೆ ಇನ್ನೂ ಮುಗಿದಿಲ್ಲ. ಮುಂದಿನ ಸೋಮವಾರ ಮತ್ತು ಮಂಗಳವಾರ ಮತ್ತೆ ಪರೀಕ್ಷೆಗಳಿವೆ. ಈ ಒತ್ತಡಗಳ ನಡುವೆ ನಾವು ಸರಳವಾಗಿ ಶಿಕ್ಷಕರ ದಿನವನ್ನು ಆಚರಿಸಿಕೊಂಡೆವು. ಒಂಬತ್ತನೆಯ ತರಗತಿ ಹುಡುಗ ಆದರ್ಶ ಪೆನ್ಸಿಲ್ ಚಿತ್ರಗಳನ್ನು ಬಿಡಿಸುವುದರಲ್ಲಿ ಚೆನ್ನಾಗಿ ಪಳಗುತ್ತಿದ್ದಾನೆ. ಅವನು ಬಿಡಿಸಿದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಅವರ ರೇಖಾಚಿತ್ರವನ್ನು ಒಂಬತ್ತನೆಯ ತರಗತಿ ಹುಡುಗರು ಹಿರಿಯ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ಅವರಿಗೆ ಸಮರ್ಪಿಸಿದರು.

05 September 2012

ಮಕ್ಕಳ ಧ್ವನಿ - 2012

ಮೂಡುಬಿದಿರೆ ವಿದ್ಯಾಗಿರಿಯ ಶಿವರಾಮ ಕಾರಂತ ವೇದಿಕೆಯಲ್ಲಿ ಮೊನ್ನೆ ಸೆಪ್ಟೆಂಬರ್ 1 ಮತ್ತು 2 ನೇ ತಾರೀಕಿನಂದು ಜರಗಿದ ಉಡುಪಿ - ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಹತ್ತೊಂಬತ್ತನೆಯ ‘ಮಕ್ಕಳ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಮ್ಮ ಶಾಲಾ ವಿದ್ಯಾರ್ಥಿಗಳು ರಸಪ್ರಶ್ನೆ ಸಹಿತ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.

04 September 2012

ವಿಜಯವಾಣಿ ಪತ್ರಿಕೆಯಲ್ಲಿ ನಮ್ಮ ಬ್ಲಾಗ್

ಸ್ನೇಹಿತರೇ, ನಮ್ಮ ‘ಮಹಾಜನ’ ಬ್ಲಾಗ್ ಬಗ್ಗೆ ಕುತೂಹಲ ಹೊಂದಿದ ವೈ.ಜಿ.ಸುರೇಶ್ ಮೊನ್ನೆ ಭಾನುವಾರ ಫೋನ್ ಮಾಡಿದ್ದರು. ಇಷ್ಟು ಪಕ್ಕನೆ ಅವರ ಬರವಣಿಗೆ ಪ್ರಕಟವಾಗುತ್ತದೆಂದು ಎಣಿಸಿರಲಿಲ್ಲ. ಆದರೆ ನಿನ್ನೆ ಸೋಮವಾರದ ಪತ್ರಿಕೆಯಲ್ಲಿಯೇ ನಮ್ಮ ಬಗ್ಗೆ ಮಾಹಿತಿ ಪ್ರಕಟವಾಗಿದೆ. ಧನ್ಯವಾದಗಳು ಸುರೇಶ್...

30 August 2012

ಓಣಂ ಆಚರಣೆ



ಮೊನ್ನೆ 24 ರಂದು, ಓಣಂ ರಜೆ ಆರಂಭವಾಗುವ ಮುನ್ನ ನಮ್ಮ ಶಾಲೆಯಲ್ಲಿ ಓಣಂ ಆಚರಣೆ ಜರಗಿತು. ಗಣಿತ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ಹೂರಂಗವಲ್ಲಿಯಲ್ಲಿ ಗಣಿತ ಆಕೃತಿಗಳನ್ನು ಬಿಡಿಸುವ ಸ್ಪರ್ಧೆ, ಮೊಸರು ಕುಡಿಕೆ ಇತ್ಯಾದಿ ಸ್ಪರ್ಧೆಗಳು ಜರಗಿದವು.  ರಕ್ಷಕ ಶಿಕ್ಷಕ ಸಂಘದ ಸದಸ್ಯರು ವಿದ್ಯಾರ್ಥಿಗಳಿಗೆ ‘ಓಣಂ ಊಟ’ವನ್ನು ಬಡಿಸಿದರು.

18 August 2012

ಕಾಗದದ ದೋಣಿ

ಅಧ್ಯಾಪಕರ ಸಾನ್ನಿಧ್ಯದಲ್ಲಿ ನೀರಲ್ಲಿ ಇಳಿದು ಆಟವಾಡುವುದೆಂದರೆ ಮಕ್ಕಳಿಗೆ ತುಂಬಾ ಖುಷಿ. ಪುತ್ತಿಗೆ ಗ್ರಾಮ ಪಂಚಾಯತು ವ್ಯಾಪ್ತಿಯ ಎಡನಾಡು ಗ್ರಾಮದಲ್ಲಿರುವ ಆನಾಡಿಪಳ್ಳ ಮದಕ ಹೆಚ್ಚು ಆಳವಿಲ್ಲದ ನೀರಾಶ್ರಯ, ವರ್ಷಪೂರ್ತಿ ನೀರಿರುವ ಪ್ರದೇಶ. ಅಂತಹ ನೀರ ಜಾಗದಲ್ಲಿ ಕಾಗದದ ದೋಣಿ ಬಿಟ್ಟು ಸಂತಸ ಪಟ್ಟ ವಿದ್ಯಾರ್ಥಿಗಳು...

ಮುಖಾರಿಕಂಡ ಅಣೆಕಟ್ಟಿನ ಕಡೆಗೆ...



ಕಾಲು ವಾರ್ಷಿಕ ಪರೀಕ್ಷೆಗಳ ನಡುವೆ ನಿನ್ನೆ, ನಮ್ಮ ಶಾಲಾ ಯು.ಪಿ ವಿಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದ ದಿನ. ‘ಸೋಣೆ’ ತಿಂಗಳ ‘ಸೋನೆ’ ಮಳೆಯ ನಡುವೆ ಸೀತಾಂಗೋಳಿ ಪರಿಸರದಲ್ಲಿ ಒಂದು ಸುತ್ತಾಟ. ಮುಖಾರಿಕಂಡ ಅಣೆಕಟ್ಟು ಸಂದರ್ಶಿಸಿ, ಕೋಡಿಮೂಲೆಯಲ್ಲಿ ಕಬ್ಬಿಣದ ಕತ್ತಿ ತಯಾರಿಯ ಬಗ್ಗೆ ಮಾಹಿತಿ ತಿಳಿದುಕೊಂಡು ಮರಳಿ ಶಾಲೆ ಸೇರುವಾಗ ಒಂದು ಖುಷಿ...

15 August 2012

ಸ್ವಾತಂತ್ರ್ಯ ಯಾತ್ರೆ

“ಸ್ವಾತಂತ್ರ್ಯ ದಿನದ ಆಚರಣೆ ವಿದ್ಯಾರ್ಥಿಗಳಲ್ಲಿ ದೇಶ ಪ್ರೇಮವನ್ನು ಬೆಳಗಿಸುತ್ತದೆ. ಆ ಮೂಲಕ ಹಿರಿಯರ  ತ್ಯಾಗ, ಬಲಿದಾನಗಳಿಂದ ಗಳಿಸಿದ ಸ್ವಾತಂತ್ರ್ಯವನ್ನು ನೆನಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಸ್ವಾತಂತ್ರ್ಯದ ಸಂದೇಶವನ್ನು ಉಳಿಸಿ ದೇಶದ ಹಿತಕ್ಕಾಗಿ ನಾವು ಶ್ರಮಿಸಬೇಕಾಗಿದೆ" ಎಂದು ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯೆ ಸೌಮ್ಯಾ ಮಹೇಶ್ ನಿಡುಗಳ ಅಭಿಪ್ರಾಯಪಟ್ಟರು. ಅವರು ಇಂದು ನಮ್ಮ ಶಾಲೆಗಳಲ್ಲಿ ಜರಗಿದ ಸ್ವಾತಂತ್ರ್ಯ ಯಾತ್ರೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು. ರವಿಕೃಷ್ಣ ಧ್ವಜಾರೋಹಣವನ್ನು ನೆರವೇರಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ಜಯದೇವ ಖಂಡಿಗೆ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ಬಹುಮಾನ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು. ಹಿರಿಯ ಶಿಕ್ಷಕರಾದ ಎಸ್.ವಿ.ಭಟ್, ಕೆ.ನಾರಾಯಣ ಭಟ್ ಮತ್ತು ಎಂ.ಸೂರ್ಯನಾರಾಯಣ ಸ್ವಾತಂತ್ರ್ಯ ಸಂಗ್ರಾಮದ ಮಹತ್ವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಧನ್ಯವಾದ ಸಮರ್ಪಿಸಿದರು.

ವಿದ್ಯಾರ್ಥಿಗಳಿಂದ ನೀರ್ಚಾಲಿನಲ್ಲಿ ಸ್ವಾತಂತ್ರ್ಯ ಮೆರವಣಿಗೆ ನಡೆಯಿತು.

13 August 2012

‘ಹೂ’ಗಳನ್ನು ಉಪಯೋಗಿಸಿ ಭೂಪಟ

ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿಯಾಗಿ ನಮ್ಮ ಶಾಲಾ ಸಮಾಜ ವಿಜ್ಞಾನ ಕ್ಲಬ್ ಆಶ್ರಯದಲ್ಲಿ 10.08.2012 ಶುಕ್ರವಾರ ನಡೆದ ಹೂರಂಗವಲ್ಲಿಯಲ್ಲಿ ಭಾರತ ಭೂಪಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳ ತಂಡ ಮತ್ತು ಕೇರಳ ಭೂಪಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿನಿಯರ ತಂಡ.

ತರಕಾರಿ ಬೀಜ ವಿತರಣೆ

ನಮ್ಮ ಶಾಲೆಯಲ್ಲಿ 10.08.2012 ಶುಕ್ರವಾರ ಕೇರಳ ಸರಕಾರದ ಕೃಷಿ ಇಲಾಖೆಯು ವಿತರಿಸಿದ ತರಕಾರಿ ಬೀಜಗಳನ್ನು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಿದ್ಯಾರ್ಥಿಗಳಿಗೆ ವಿತರಿಸಿದರು.

10 August 2012

ಸಿ.ಪಿ.ಸಿ.ಆರ್.ಐ ಗೆ ಭೇಟಿ

ಕಾಸರಗೋಡಿನಲ್ಲಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಕೇಂದ್ರಕ್ಕೆ 06.08.2012 ಸೋಮವಾರದಂದು ನಮ್ಮ ಶಾಲಾ ವಿದ್ಯಾರ್ಥಿಗಳು ಭೇಟಿ ನೀಡಿ ವಿಜ್ಞಾನಿ ಮಣಿಕಂಠನ್ ಅವರಿಂದ ಕಸಿ ಕಟ್ಟುವ ವಿಧಾನದ ಬಗ್ಗೆ ಮಾಹಿತಿ ಪಡೆದುಕೊಂಡರು.

“ಶ್ರೀಕೃಷ್ಣ ಆತ್ಮೀಯ ದೇವರು": ಕೆ.ಶಿವಕುಮಾರ್


 “ಶ್ರೀಕೃಷ್ಣನ ಬಾಲಲೀಲೆಗಳು ಎಂದೆಂದಿಗೂ ಚೇತೋಹಾರಿ. ಧರ್ಮ ಸಂಸ್ಥಾಪನೆಗಾಗಿ ಅವನು ಕೈಗೊಂಡ ಕಾರ್ಯಗಳ ಸಮಾಜಕ್ಕೆ ಆದರ್ಶ. ಅವನ ಪಥ ಅನುಕರಣೀಯ, ಆದರಿಂದಲೇ ಆತ ಎಲ್ಲರಿಗೂ ಆತ್ಮೀಯ ದೇವರು ಎಂದು ಪೆರ್ಲ ಶ್ರೀ ಸತ್ಯನಾರಾಯಣ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು. ಅವರು ೦೯.೦೮.೨೦೧೨ ಗುರುವಾರ ಪೆರಡಾಲ ಮಹಾಜನ ವಿದ್ಯಾಭಿವರ್ಧಕ ಸಂಘದ ‘ವಿದ್ಯೋದಯ ಸಭಾ’ ಆಶ್ರಯದಲ್ಲಿ ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ‘ಶ್ರೀಕೃಷ್ಣ ಜಯಂತಿ’ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಪ್ರೌಢಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ್ ರಾವ್ ಮುಖ್ಯ ಅತಿಥಿಗಳಾಗಿದ್ದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ. ಗೋವಿಂದ ಭಟ್ ಉಪಸ್ಥಿತರಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿ ನಾಯಕಿ ಸುಶೀಲಾ.ಎಸ್ ವರದಿ ವಾಚಿಸಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಜಯದೇವ ಖಂಡಿಗೆ ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಶಾಲಾ ಹಳೆ ವಿದ್ಯಾರ್ಥಿಗಳಾದ ಹೇಮಶ್ರೀ ಕಾಕುಂಜೆ ಮತ್ತು ಶ್ರೀವಾಣಿ ಕಾಕುಂಜೆ ಇವರಿಂದ ‘ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ ಜರಗಿತು. ವಯಲಿನ್‌ನಲ್ಲಿ ಪ್ರಭಾಕರ ಕುಂಜಾರು ಮತ್ತು ಮೃದಂಗದಲ್ಲಿ ಶ್ರೀಧರ ಭಟ್ ಬಡಕ್ಕೇಕೆರೆ ಸಹಕರಿಸಿದರು.

11 July 2012

ಶ್ರದ್ಧಾ. ಎಸ್ ಬಿಡಿಸಿದ ಚಿತ್ರ

ಇದು ಒಂಭತ್ತನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ಕಲಿಯುತ್ತಿರುವ ಹುಡುಗಿ ಶ್ರದ್ಧಾ.ಎಸ್ ಬಿಡಿಸಿದ ಚಿತ್ರ.